ಮಂಗಳೂರು : 10 ತಿಂಗಳ ಮಗುವಿನ ಕರೋನಾ ಪ್ರಕರಣವು, ರಾಜ್ಯದಲ್ಲೇ ವಿಶಿಷ್ಟ ಪ್ರಕರಣವಾಗಿತ್ತು. ಕೇವಲ ಎದೆ ಹಾಲು ಕುಡಿಯುವ ಪುಟ್ಟ ಕಂದನಿಗೆ ಕರೋನಾ ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು.
ಪುಟ್ಟ ಮಗುವಿನ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ಬಹಳ ಸೂಕ್ಷ್ಮವಾಗಿತ್ತು. ವೈದ್ಯರು ಈ ಸವಾಲನ್ನು ಬಹಳ ನಾಜೂಕಾಗಿ ನಿರ್ವಹಿಸಿದ್ದು, ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ. ಇದು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೂ ಖ್ಯಾತಿ ತಂದಿದೆ.
ಅದೇ ರೀತಿ, ಮಗುವಿನ ಗ್ರಾಮದಲ್ಲಿ ಯಾರಿಗೂ ಕರೋನಾ ಹರಡದಿರುವುದು ಸಮಾಧಾನಕರ ವಿಷಯವಾಗಿದೆ. ಕರೋನಾ ದೃಢಪಟ್ಟ ನಂತರ ಇಡೀ ಸಜೀಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಲಾಗಿತ್ತು.
ಗ್ರಾಮಸ್ಥರು ಬಹಳ ಉತ್ತಮ ಸಹಕಾರ ನೀಡಿದ್ದಾರೆ. ಈ ಅವಧಿಯಲ್ಲಿ ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ ಒದಗಿಸಿತ್ತು.
ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದ ಮಗುವೊಂದು ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿತ್ತು. ಮಗುವನ್ನು ಮಾ.23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 24ರಂದು ಮಗುವಿನ ಗಂಟಲು ಸ್ರಾವ ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿತ್ತು. ಶುಕ್ರವಾರ ವರದಿ ಬಂದಿತ್ತು. ಮಗುವಿನಲ್ಲಿ ಕೊರೊನಾ ಇರುವುದು ಖಚಿತವಾಗಿದೆ.
ಅಂದಿನಿಂದ ವೈದ್ಯರು ಮಗುವನ್ನು ಮಹಾಮಾರಿಯಿಂದ ಉಳಿಸಿಕೊಳ್ಳಲೇಬೇಕು ಎಂದು ಪಣತೊಟ್ಟು ಪ್ರಯತ್ನ ಪ್ರಾರಂಭಿಸಿದ್ದರು. ಕೊನೆಗೂ ದೇವರ ದೂತರಂತೆ ಬಂದಿರುವ ವೈದ್ಯರು ಮಗುವನ್ನು ಅಪಾಯದಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Discussion about this post