ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಿಗೆ ತಿರುಗೇಟು ಕೊಟ್ಟ ಪರಮೇಶ್ವರ್
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥಿತವಾಗಿದ್ದು, ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪ ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ವ್ಯವಸ್ಥಿತವಾಗಿದ್ದು ಯಾವುದೇ ಸಂದರ್ಭದಲ್ಲೂ ಹತೋಟಿ ಮೀರಿಹೋಗಿಲ್ಲ ಅಂದರು
ಮಾದಕ ಪದಾರ್ಥಗಳ ದಂಧೆಗೆ ಸಂಪೂರ್ಣ ಕಡಿವಾಣ ಹಾಕುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮಾದಕ ದ್ರವ್ಯ ಹಾವಳಿ ಮೊದಲಿಗಿಂತ ಕಡಿಮೆಯಾಗಿದ್ದು, ಇಲ್ಲಿಯವರೆಗೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಹಾಕಲಾಗಿದೆ ಎಂದು ಮಾಹಿತಿ ನೀಡಿದರು.
ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಮಾದಕ ವ್ಯಸನಿಗಳನ್ನ ಹಿಡಿದು ತಂದು ಅವರಿಗೆ ಪರೀಕ್ಷೆಗೊಳಪಡಿಸಲಾಗಿದೆ. ಅವರ ಮೂಲಕ ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸುವ ಕಾರ್ಯ ನಡೆಯುತ್ತಿದೆ. ರಾಜ್ಯದ ಪ್ರತಿ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಒಬ್ಬ ಡ್ರಗ್ ಪೆಡ್ಲರ್ ನನ್ನ ಬಂಧನ ಮಾಡಲಾಗಿದ್ದು, ಅವನು ನೈಜೇರಿಯಾದಿಂದ ಡ್ರಗ್ಸ್ ತಂದು ಮಾರಾಟ ಮಾಡಿರುವುದು ಗಮನಕ್ಕೆ ಬಂದಿದೆ ಎಂದು ಪರಮೇಶ್ವರ್ ಹೇಳಿದರು.
ಸೈಬರ್ ಕ್ರೈಂ ತಡೆಗಟ್ಟಲು ಕಠಿಣ ಕ್ರಮ ತಗೆದುಕೊಳ್ಳಲಾಗಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಸಾವಿರಾರು ಜನರ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.