ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಫ್ರಂಟ್ ಲೈನ್ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿರುವ ರಾಜ್ಯ ಪೊಲೀಸ್ ಸಿಬ್ಬಂದಿ ಸೋಂಕಿಗೆ ತುತ್ತಾದ್ರೆ ಅವರ ಚಿಕಿತ್ಸೆ ಸಲುವಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.
ಪೊಲೀಸ್ ಇಲಾಖೆ ವತಿಯಿಂದಲೇ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಬೆಡ್ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.
ಈ ನಡುವೆ ರಾಜ್ಯ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಇನ್ಮುಂದೆ ಹೈದರಬಾದ್ ನ 3 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಹೈದರಬಾದ್ ಕರ್ನಾಟಕ ಭಾಗದ ಪೊಲೀಸ್ ಸಿಬ್ಬಂದಿ ಸೋಂಕಿಗೆ ತುತ್ತಾದ್ರೆ ಚಿಕಿತ್ಸೆಗೆ ಬೆಂಗಳೂರಿಗೆ ಬರಬೇಕಾಗಿತ್ತು. ಇದರಿಂದ ಪೊಲೀಸ್ ಸಿಬ್ಬಂದಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು.
ಹೀಗಾಗಿ ಈ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಹೈದರಬಾದ್ ಕರ್ನಾಟಕ ಭಾಗದ ಪೊಲೀಸ್ ಸಿಬ್ಬಂದಿಗೆ ಹೈದರಬಾದ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಪೊಲೀಸ್ ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಹೈದರಬಾದ್ ನ ಕಿಂಗ್ ರಸ್ತೆಯಲ್ಲಿರುವ ಕಾಮಿನೇನಿ ಆಸ್ಪತ್ರೆ, ಹೈಟೆಕ್ ಸಿಟಿಯ ಫೇಸ್ ಆಸ್ಪತ್ರೆ ಹಾಗೂ ರಾಜೇಂದ್ರ ನಗರ ಅತ್ತಾಪೂರುನಲ್ಲಿರುವ ಜರ್ಮನ್ಟನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಪೊಲೀಸ್ ಪ್ರಧಾನ ಕಛೇರಿಯ ಪ್ರಕಟಣೆ ತಿಳಿಸಿದೆ.
Discussion about this post