ಬೆಂಗಳೂರು : ಪೇಜಾವರ ಶ್ರೀಗಳ ದಲಿತ ಕೇರಿ ಭೇಟಿ ಕುರಿತಂತೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ದ ಇದೀಗ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಈಗಾಗಲೇ ಈ ಸಂಬಂಧ ಹೋರಾಟಗಳು, ಪ್ರತಿಭಟನೆಗಳು ಕೂಡಾ ನಡೆದಿದೆ.
ಈ ನಡುವೆ ಹಂಸಲೇಖ ಆರೋಗ್ಯದಲ್ಲಿ ಏರುಪೇರಾಗಿದೆ ಅನ್ನುವ ಸುದ್ದಿ ಮಂಗಳವಾರ ಸಂಜೆಯಿಂದ ಹರಿದಾಡಿತ್ತು. ಇದಾದ ಬೆನ್ನಲ್ಲೇ ಸಾಕಷ್ಟು ಜನ ಹಂಸಲೇಖ ಅವರನ್ನು ಸಂಪರ್ಕಿಸಿ ಆರೋಗ್ಯ ವಿಚಾರಿಸಿದ್ದರು. ಆತಂಕವನ್ನೂ ವ್ಯಕ್ತಪಡಿಸಿದ್ದರು.ಇದಾದ ಬೆನ್ನಲ್ಲೇ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬಹಿರಂಗ ಪತ್ರ ಬರೆದ ಹಂಸಲೇಖ
“ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ, ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ.ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಅಭಿಮಾನ ಆವೇಶವಾಗಬಾರದು. ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು, ಹಾಡು ಕೇಳಿಸುತ್ತದೆ. ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು ಅಂದಿದ್ದಾರೆ.
Discussion about this post