ಮೈತ್ರಿ ಸರ್ಕಾರದ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಮತ್ತು ದೇವೇಗೌಡರೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Buy Fitness & Sports Accessories starting from Rs.149
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಅನ್ನುವುದೇ ನನ್ನ ಆಶಯವಾಗಿತ್ತು. ನಾವು 70 ಶಾಸಕರಿದ್ದರೂ ಜೆಡಿಎಸ್ ಗೆ ಬೆಂಬಲ ಕೊಟ್ಟೆವು. ನಾನು ಎಂದಿಗೂ ಕುಮಾರಸ್ವಾಮಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲಿಲ್ಲ. ಈಗ ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.
ದೇವೇಗೌಡರು ನನ್ನ ವಿರುದ್ಧ ಮಾಧ್ಯಮಗಳಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಅಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಡಬಾರದು ಅಂದುಕೊಂಡಿದ್ದೆ. ಆದರೆ ಹಿಂದು ಪತ್ರಿಕೆಗೆ ಕೊಟ್ಟ ಸಂದರ್ಶನ ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಜೊತೆಗೆ ದೇವೇಗೌಡರು ಸುದ್ದಿ ಮಾಧ್ಯಮಗಳ ಜೊತೆಗೂ ಈ ಸಂಬಂಧ ಮಾತನಾಡಲಾರಂಭಿಸಿದ್ದಾರೆ. ಹೀಗಾಗಿ ಪ್ರತಿಕ್ರಿಯೆ ಕೊಡದಿದ್ದರೆ ತಪ್ಪಾಗುತ್ತದೆ. ಮೌನವಾಗಿರುವುದು ಸರಿಯಲ್ಲ. ಈ ಕಾರಣದಿಂದ ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದೇನೆ ಎಂದರು.
ನಾನೂ 5 ವರ್ಷ ಮುಖ್ಯಮಂತ್ರಿಯಾಗಿದ್ದೆ. ಆ ವೇಳೆ ಒಬ್ಬ ಶಾಸಕನೂ ಸರ್ಕಾರದ ವಿರುದ್ಧ ಮಾತನಾಡಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯ ಶಾಸಕರನ್ನು ನಿರ್ಲಕ್ಷ್ಯ ಮಾಡಿ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದು ಮತ್ತು ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದೇ ಸರ್ಕಾರದ ಪತನಕ್ಕೆ ಕಾರಣ ಎಂದು ಸ್ಪಷ್ಟಪಡಿಸಿದರು.
Discussion about this post