ಮಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೆ ದಕ್ಷಿಣ ಕನ್ನಡದಲ್ಲಿ ಮಾತ್ರ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಂದು ಹೋದ ಮೇಲಾದ್ರೂ ಅಧಿಕಾರಿಗಳು ಚುರುಕಾಗ್ತಾರೆ ಅಂದುಕೊಂಡ್ರೆ ಅದು ಸುಳ್ಳಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತಿಲ್ಲ.
ಹಾಗಾದ್ರೆ ಸೋಂಕು ಹೆಚ್ಚಾಗಲು ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೇ, ಖಂಡಿತಾ ಅಲ್ಲ ಕೇವಲ ಅಧಿಕಾರಿಗಳಿಂದ ಸೋಂಕು ನಿಯಂತ್ರಿಸುವುದು ಕನಸಿನ ಮಾತು. ಬದಲಾಗಿ ಬುದ್ದಿವಂತರನ್ನು ಹೊಂದಿರುವ ಜಿಲ್ಲೆಯ ಜನ ಕೂಡಾ ಸ್ಪಂದಿಸಬೇಕು. ಅದರಲ್ಲೂ ಶಿಕ್ಷಣ ಸಂಸ್ಥೆಗಳಿಗೆ ಬದ್ಧತೆ ಇರಬೇಕು.
ಲಾಕ್ ಡೌನ್ ಸಡಿಲಿಕೆ ಬಳಿಕ ಇದೀಗ ದಕ್ಷಿಣ ಕನ್ನಡದಲ್ಲಿ ಕಾಲೇಜುಗಳು ಪ್ರಾರಂಭಗೊಂಡಿದೆ. ಮಂಗಳೂರಿನಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ ಕೇರಳದ ಸಾಕಷ್ಟು ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಇದೀಗ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲೇ ಅತೀ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರದ ನಿಯಮಗಳ ಪ್ರಕಾರ ಕೇರಳ ವಿದ್ಯಾರ್ಥಿಗಳು ತಮ್ಮ ರಾಜ್ಯದ ಬಂದ ತಕ್ಷಣ ಕ್ವಾರಂಟೈನ್ ಗೆ ಒಳಗಾಗಬೇಕು. ಆದರೆ ಮಂಗಳೂರಿನ ಅನೇಕ ಪ್ರತಿಷ್ಟಿತ ಕಾಲೇಜುಗಳಲ್ಲಿ ಕ್ವಾರಂಟೈನ್ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕಾಲೇಜು ಆಡಳಿತ ಮಂಡಳಿಯೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.
ಇದನ್ನು ಗಮನಿಸಿರುವ ಜಿಲ್ಲಾ ಆರೋಗ್ಯ ಇಲಾಖೆ ಸಂಬಂಧ ಪಟ್ಟ ಕಾಲೇಜುಗಳಿಗೆ ಎಚ್ಚರಿಕೆ ಕೊಟ್ಟಿದ್ದು, ಕ್ವಾರಂಟೈನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಒಂದು ವೇಳೆ ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣವಿದ್ದರೆ ಆರೋಗ್ಯ ಇಲಾಖೆಗೆ ಮಾಹಿತಿ ಕೊಡಿ ಎಂದು ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳು ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬದ್ಧತೆ ತೋರಿದರೆ ಒಂದೇ ವಾರದಲ್ಲಿ ಸೋಂಕು ನಿಯಂತ್ರಣಕ್ಕೆ ಬರುವುದರಲ್ಲಿ ಅನುಮಾನವಿಲ್ಲ.
Discussion about this post