ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಪ್ರಾರಂಭಗೊಂಡಿದ್ದ ಟಿಪ್ಪು ಜಯಂತಿ ಆಚರಣೆಗೆ ಯಡಿಯೂರಪ್ಪ ಸರ್ಕಾರ ಬ್ರೇಕ್ ಹಾಕಿದೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಆರಂಭವಾದಾಗಿನಿಂದ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ಅವರು ಮನವಿ ಮಾಡಿದ್ದರು.
ಇಂದು ನಡೆದ ಸಿಂಗಲ್ ಮ್ಯಾನ್ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ. ಶಾಸಕ ಕೆ.ಜಿ. ಬೋಪಯ್ಯ ಅವರು ಸಲ್ಲಿಸಿದ್ದ ಮನವಿ ಹಿನ್ನಲೆಯಲ್ಲಿ ಯಡಿಯೂರಪ್ಪ ಈ ಕ್ರಮ ಕೈಗೊಂಡಿದ್ದು, ಈ ವರ್ಷದ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆ ನಡೆಯುವುದಿಲ್ಲ.
ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ರದ್ದು ಮಾಡಿರುವ ರಾಜ್ಯ ಸರಕಾರದ ಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದುರುದ್ದೇಶದಿಂದ ಟಿಪ್ಪು ಜಯಂತಿ ರದ್ದು ಮಾಡಿರುವ ಸರಕಾರದ ಕ್ರಮ ಅಲ್ಪಸಂಖ್ಯಾತರ ವಿರುದ್ಧ ಆಗಿದೆ. ಟಿಪ್ಪು ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ. ಬ್ರಿಟಿಷ್ ವಿರುದ್ಧ ಹೋರಾಟ ಮಾಡಿದ ವ್ಯಕ್ತಿಯ ಗೌರವಾರ್ಥ ಆಚರಣೆಯನ್ನು ನಾವು ಆರಂಭಿಸಿದ್ದೆವು ಎಂದಿದ್ದಾರೆ.
Discussion about this post